ಅಜಿತ್ ಹರೀಶಿ

ವೈದ್ಯ ಮತ್ತು ಲೇಖಕರಾದ ಡಾ. ಅಜಿತ್ ಹರೀಶಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹರೀಶಿ ಗ್ರಾಮದವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹುಟ್ಟೂರಿನ ಸರ್ಕಾರಿ ಶಾಲೆಗಳಲ್ಲಿ, ಪದವಿಪೂರ್ವ ಶಿಕ್ಷಣವನ್ನು
ಶಿರಸಿಯಲ್ಲಿ ಮುಗಿಸಿರುತ್ತಾರೆ. ಆಯುರ್ವೇದ ಮಹಾವಿದ್ಯಾಲಯ,ಹುಬ್ಬಳ್ಳಿಯಲ್ಲಿ ವೈದ್ಯಕೀಯ ಪದವೀಧರರಾದ ಇವರು, ಆಕ್ಯುಪಂಕ್ಚರ್ ಚಿಕಿತ್ಸೆ,ಹಿಪ್ನೋಥೆರಪಿಯಲ್ಲಿಯೂ ಪರಿಣಿತರು.
ಪ್ರಸ್ತುತ ಹರೀಶಿಯಲ್ಲಿ ಖಾಸಗಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಬರವಣಿಗೆಯನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ
ಪ್ರಕಟಿತ ಕವನ ಸಂಕಲನಗಳು. ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು. ಕಥಾಭರಣ ಸಂಪಾದಿತ ಕೃತಿಯಾಗಿದೆ. ಆರೋಗ್ಯದ ಅರಿವು ಎಂಬ ಅಂಕಣ ಬರಹದ ಗುಚ್ಛ ಮತ್ತು ಕೃತಿಕರ್ಷ
(ವಿಮರ್ಶಾ ಕೃತಿ) ಪುಸ್ತಕವಾಗಿ ಪ್ರಕಟಗೊಂಡಿವೆ. ಬಸವ ಪುರಸ್ಕಾರ, ಕಾವ್ಯ ಮಾಣಿಕ್ಯ, ಗುರುಕುಲ ಸಾಹಿತ್ಯ ಶರಭ, ತರಾಸು ರತ್ನ ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಗರಿಮೆ ಕೂಡಾ ಇವರದ್ದು. ಕನ್ನಡ ಪ್ರತಿಲಿಪಿ ರಾಷ್ಟ್ರೀಯ
ಹಾಗೂ ಕಿರುಗಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಮತ್ತು ಸಂಪದಸಾಲು ಪತ್ರಿಕೆಯ ಜಾಗತಿಕ ಕವನ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಇವರ `ಕನ್ನಡಿಗಂಟದ ಬಿಂದಿ’ ಕಥೆಗೆ ಮುಂಬೈನ ಕನ್ನಡ ಭವನ ಎಜುಕೇಷನ್
ಸೊಸೈಟಿಯವರ ರಾಷ್ಟ್ರೀಯ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ದೊರೆತಿದೆ. ಇವರ ಕನಸಿನ ದನಿ ಕವನ ಸಂಕಲನಕ್ಕೆ ೨೦೨೧ನೇ ಸಾಲಿನ ಸುಮನ್ ಸೋಮಶೇಖರ ಸೋಮವಾರಪೇಟೆ ಕಸಾಪ ದತ್ತಿ ಪ್ರಶಸ್ತಿ, ಪಂ.
ಪುಟ್ಟರಾಜ ಗವಾಯಿ ಪ್ರಶಸ್ತಿ ಮತ್ತು ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ ವನರಾಗ ಶರ್ಮಾ ಪುಸ್ತಕ ಪ್ರಶಸ್ತಿಗಳು ದೊರೆತಿವೆ. ವಿಶ್ವವಿಖ್ಯಾತ ಮೈಸೂರು ದಸರಾ ಮತ್ತು ಕದಂಬೋತ್ಸವ ಕವಿಗೋಷ್ಠಿಯಲ್ಲಿ ಪಾಲ್ಗೊಂಡಿರುತ್ತಾರೆ.
ಇವರ `ತಿರುವು’ ಕಥೆ ಹಿಂದಿ ಭಾಷೆಗೆ `ಮೋಡ್’ ಎಂಬ ಹೆಸರಿನಲ್ಲಿ ಅನುವಾದಗೊಂಡಿದೆ. ಇವರನ್ನು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ೧೪ನೇ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಲಾಗಿದೆ.